ಪಾದಚಾರಿಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆಗೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು:

“ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಪಾದಚಾರಿ ಮಾರ್ಗದಲ್ಲಿ ಜನರಿಗೆ ಓಡಾಡಲು ಅವಕಾಶವೇ ಇಲ್ಲವಾಗಿದೆ. ಹೀಗಾಗಿ ಬೀದಿಬದಿ ವ್ಯಾಪಾರಿಗಳ ಹಿತ ರಕ್ಷಣೆ ಜತೆಗೆ ಪಾದಚಾರಿ ಮಾರ್ಗದಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜ್ಞಾನಭಾರತಿ ಸಭಾಂಗಣದ ಬಳಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬೀದಿ ಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸಬೇಕು ಎಂದು ಅನೇಕ ಒತ್ತಡವಿದೆ. ನಾನೇ ಖುದ್ದಾಗಿ ಪರಿಶೀಲನೆ ನಡೆಸಿದ್ದೇನೆ. ಅನೇಕ ಕಡೆ ರಸ್ತೆಯೇ ಇಲ್ಲ. ಬೀದಿ ವ್ಯಾಪಾರಿಗಳ ವಿರುದ್ದ ನಾವಿಲ್ಲ, ಅವರಿಗೆ ತೊಂದರೆ ನೀಡುವ ಉದ್ದೇಶ ನಮ್ಮದಲ್ಲ. ಅವರು ಕೂಡ  ಬದುಕಬೇಕು, ಜೀವನ ಮಾಡಬೇಕು. ಆದರೆ ಜನರ ಓಡಾಟಕ್ಕೆ ಪಾದಚಾರಿ ಮಾರ್ಗದಲ್ಲಿ ದಾರಿ ಬಿಡಬೇಕು. ಹಾಗೇ ದಾರಿ ಬಿಟ್ಟಿದ್ದರೆ ಯಾವುದೇ ರೀತಿ ಅಭ್ಯಂತರವಿಲ್ಲ ಎಂದರು.

 ಜೊತೆಗೆ ಜನರು ಓಡಾಡಲು ಜಾಗವೂ ಬೇಕಲ್ಲವೇ? ಪಾದಚಾರಿ ಮಾರ್ಗದಲ್ಲಿ ಜನರೂ ಓಡಾಡಬೇಕು, ವ್ಯಾಪಾರಿಗಳು ಬದುಕಬೇಕು. ಈ ವಿಚಾರವಾಗಿ ಅನೇಕರು ಬಂದು ದೂರು ನೀಡಿದ್ದಾರೆ. ಇಬ್ಬರ ಹಿತ ಕಾಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು.

ತಮ್ಮ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣದ ವಿಚಾರಣೆಗೆ  ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿರುವ ಬಗ್ಗೆ ಪ್ರಶ್ನಿಸಿದಾಗ, “ತೀರ್ಪು ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ನನಗೆ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ಗೌರವ, ನಂಬಿಕೆ ಇದೆ. ನ್ಯಾಯ ನೀಡುವ ಸ್ಥಾನದಿಂದ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ. ನನ್ನ ಮೇಲೆ ಏನೇ ಸುಳ್ಳು ಕೇಸು ಹಾಕಿದರೂ ನ್ಯಾಯಲಯದಲ್ಲಿ ನನಗೆ ನ್ಯಾಯ ಸಿಗಲಿದೆ. ಈ ಸುಳ್ಳು ಕೇಸಿನ ಬಗ್ಗೆ ರಾಜ್ಯದ ಜನರಿಗೆ ಮುಂದೊಂದು ದಿನ ವಿವರಿಸುತ್ತೇನೆ. ಈಗ ಆ ವಿಚಾರವಾಗಿ ಮಾತನಾಡುವುದಿಲ್ಲ” ಎಂದು ಪ್ರತಿಕ್ರಿಯಿಸಿದರು. 

ರಾಹುಲ್ ಗಾಂಧಿ ಅವರು ರಾಜ್ಯ ನಾಯಕರನ್ನು ದೆಹಲಿಗೆ ಕರೆದಿರುವ ಬಗ್ಗೆ ಕೇಳಿದಾಗ, “ರಾಹುಲ್‌ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಈ ಸಭೆ ನಡೆಸಬೇಕಿತ್ತು, ಅದೇ ದಿನ ಉಮ್ಮನ್‌ ಚಾಂಡಿ ಅವರು ನಿಧನ ಹೊಂದಿದರು. ಆದ ಕಾರಣ ಅವತ್ತಿನ ಮೀಟಿಂಗ್‌ ರದ್ದಾಗಿತ್ತು. ರಾಜ್ಯ ಸರ್ಕಾರ ಈಗಾಗಲೇ  4 ಗ್ಯಾರಂಟಿಗಳು ಜಾರಿಗೆ ತಂದಿದ್ದು, ಅವುಗಳನ್ನು ಹೇಗೆ ಪ್ರಚಾರ ಮಾಡಬೇಕು. ಹಾಗೂ ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂದು ಚರ್ಚೆ ಮಾಡಲಿದ್ದಾರೆ. ಮುಂದೆ ಲೋಕಸಭಾ ಚುನಾವಣೆ ಇದೆ, ಹಿರಿಯ ನಾಯಕರಿಗೆ ಜವಾಬ್ದಾರಿ ನೀಡಬೇಕಾಗಿದೆ. ಅಭ್ಯರ್ಥಿಗಳ ಆಯ್ಕೆ ಹೇಗಿರಬೇಕು ಎಂಬ ವಿಚಾರವಾಗಿ ನಾವು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕು. ಇದಕ್ಕಾಗಿ ಕೆಲವು ಸಲಹೆ, ಸೂಚನೆ ನೀಡಲಿದ್ದಾರೆ ” ಎಂದು ತಿಳಿಸಿದರು.
 
ಸರ್ಕಾರ ಮತ್ತು ಪಕ್ಷದ ನಡುವೆ ಸಮನ್ವಯ ಸಾಧಿಸಲು ಸಮಿತಿ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆಗೆ "ಸಮನ್ವಯ ಸಾಧನೆಗೆ ನಾವೇ ಇಲ್ಲವೇ?  ನಾನು ಸರ್ಕಾರವೂ ಹೌದು, ಪಕ್ಷವೂ ಹೌದು. ಅದೇ ರೀತಿ ಮುಖ್ಯಮಂತ್ರಿಗಳು ಕೂಡ ಪಕ್ಷದವರೂ ಹೌದು, ಸರಕಾರವೂ ಹೌದು. ಹೀಗಾಗಿ ನಾವೇ ಇರುವಾಗ ಸಮನ್ವಯ ಸಮಿತಿ ಏಕೆ? ನಾವೇ ಎಲ್ಲ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಬೆಂಗಳೂರು ಸಮಸ್ಯೆಗಳ ಬಗ್ಗೆ ಪಾಲಿಕೆ ಅಧಿಕಾರಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಹೇಳಿದಾಗ, “ಸಮಸ್ಯೆ ವಿಚಾರವಾಗಿ ಅಧಿಕಾರಿಗಳು ಮಾತನಾಡಲಿ. ಆದರೆ ನೀತಿ ನಿರೂಪಣೆ ಬಗ್ಗೆ ಅವರು ಬಾಯಿಗೆ ಬಂದಂತೆ ಮಾತನಾಡಲು ಸಾಧ್ಯವಿಲ್ಲ. ಪಾಲಿಸಿ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು. ಅವರು ಹೇಗೆ ಮಾತನಾಡುತ್ತಾರೆ? ಅವರು ಸ್ಥಳೀಯವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದ್ದೇವೆ” ಎಂದು ತಿಳಿಸಿದರು.

ಪಕ್ಷದಲ್ಲಿ ಶಾಸಕರ ಅಸಮಾಧಾನ ಇದೆಯೇ ಎಂದು ಕೇಳಿದಾಗ, ‘ಯಾವುದೇ ಅಸಮಾಧಾನವಿಲ್ಲ, ಅದೆಲ್ಲ ಉಹಾಪೋಹ ಎಂದರು.

ಬೆಂಗಳೂರು ನಗರದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಮಾತನಾಡಲಿ, ಆದರೆ ನೀತಿ, ನಿಯಮಗಳ ವಿಚಾರದ ಬಗ್ಗೆ ಅವರು ಹೇಗೆ ಮಾತನಾಡುತ್ತಾರೆ? ಅದಕ್ಕೆ ಅಭಿವೃದ್ದಿ ವಿಚಾರವಾಗಿ ನಾವು ಮಾತನಾಡುತ್ತೇವೆ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.